ಬೆಳಗಾವಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಯಮಕನಮರಡಿ ವಿಧಾನಸಭಾ ಕ್ಷೇತ್ರ ನನ್ನ ತವರು ಕ್ಷೇತ್ರವಾಗಿದ್ದು, ಇಲ್ಲಿನ ಜನರು ನನನಗೆ ಮತ ನೀಡಿ ಭಾರಿ ಅಂತರವನ್ನು ಇಲ್ಲಿಂದಲೇ ಕೊಡಬೇಕು ಎಂದು ಮತದಾರರಲ್ಲಿ ಚಿಕ್ಕೋಡಿ ಲೋಕಸಭಾ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಜಿನರಾಳ, ಕುರಣಿವಾಡಿ, ಚಿಕ್ಕಾಲಗುಡ್ಡ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಅವರು ಮಾತನಾಡಿದರು. ನಮ್ಮ ತಂದೆಯವರ ಕ್ಷೇತ್ರವಾದ ಯಮಕನಮರಡಿ ಇದು ನಮ್ಮ ಕ್ಷೇತ್ರ. ತಂದೆಯರಿಗೆ ತೋರಿದ ಅಭಿಮಾನ- ಬೆಂಬಲ ನಿಮ್ಮ ಮನೆ ಮಗಳಾದ ನನಗೂ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಒಂದು ಭಾರಿ ಅವಕಾಶ ನೀಡಿ ಆಶೀರ್ವಾದ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದ ಅವರು, ದೇಶದ ಭದ್ರ ಬುನಾದಿಗೆ ಯುವಕರು ರಾಜಕೀಯಕ್ಕೆ ಬರಬೇಕಾಗಿದೆ.
ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಕ್ಕಿದೇ , ಕಳೆದ 15 ವರ್ಷಗಳಿಂದ ನಮ್ಮ ತಂದೆಯವರು ಈ ಕ್ಷೇತ್ರದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅಲ್ಲದೇ ಈ ಕ್ಷೇತ್ರದ ನಾಡಿ ಮಿಡಿತದ ಅರಿವು ಅವರಿಗಿದೆ. ಹೀಗಾಗಿ ನನಗೂ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಒಂದು ಭಾರಿ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಯಮಕನಮರಡಿ ಮತಕ್ಷೇತ್ರದಲ್ಲಿ ಈಗಾಗಲೇ ನಮ್ಮ ತಂದೆಯವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ. ಅಲ್ಲದೇ ಕಳೆದ 15 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ-ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ಈ ಕ್ಷೇತ್ರದಲ್ಲಿ ಮಾಡಲು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡ ನನಗೆ ಆಶೀರ್ವಾದ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಉಪಸ್ಥಿತರಿದ್ದರು.