ಖಾನಾಪುರ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಬುಧವಾರ ತಾಲೂಕಿನ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಂದಗಡ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಮೇಲ್ಮಟ್ಟದ ಜಲಸಂಗ್ರಾಲಯ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು ಹಾಗೂ ಯೋಜನೆಯ ನೀಲನಕ್ಷೆಯನ್ನು ವೀಕ್ಷಿಸಿ ಮಾಹಿತಿ ಪಡೆದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಯೋಜನೆಯ ಕುರಿತು ಅಧಿಕಾರಿಗಳಿಗೆ ವಿವರಿಸಿದರು. ಗುಣಮಟ್ಟದ ಹಾಗೂ ಶೀಘ್ರವಾಗಿ ಕಾಮಗಾರಿಯನ್ನು ಕೈಗೊಳ್ಳುವಂತೆ ಸಿಇಒ ರವರು ಸೂಚನೆ ನೀಡಿದರು.
ನಂತರ ನಂದಗಡ ಗ್ರಾಪಂ ಘನ ತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಿ, ನಿರ್ವಹಣೆಯ ಕುರಿತು ಸ್ವಚ್ಛತಾಗಾರರಿಂದ ಮಾಹಿತಿ ಪಡೆದರು. ಸೂಕ್ತವಾಗಿ ನಿರ್ವಹಣೆ ಮಾಡುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೀಡಿ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಭೇಟಿ ನೀಡಿ, ತೆರಿಗೆ ವಸೂಲಾತಿ, ಮನರೇಗಾ ಯೋಜನೆ ಸೇರಿ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದು, ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.
ಗ್ರಾಪಂ ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ಓದುಗರ ಹಾಜರಾತಿ, ಪುಸ್ತಕಗಳು ಸೇರಿ ಗ್ರಂಥಾಲಯದಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷವಾಗಿ ಅಂಧ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದಲ್ಲಿ ಒದಗಿಸಿರುವ ಪುಸ್ತಕಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಲಿಂಗನಮಠ ಗ್ರಾಮದ ಸಮೀಪ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಅಳವಿಡಿಸಿರುವ ಹೈಡ್ರಾಲಿಕ್ಸ್ ಪೈಪಲೈನ್ ನ್ನು ವೀಕ್ಷಿಸಿದರು.
ನಾಗರಗಾಳಿ ಗ್ರಾಪಂ ವ್ಯಾಪ್ತಿಯ ಬಾಮನಕೊಪ್ಪ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಕೆರೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿದರು. ಕೂಲಿಕಾರರ ಹಾಜರಾತಿಯನ್ನು ವೀಕ್ಷಿಸಿದರು ಹಾಗೂ ಕೂಲಿಕಾರರ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದಿನೇಶಕುಮಾರ ಮೀನಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ ಮೇತ್ರಿ, ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್. ಅಂಬಗಿ, ತಾಪಂ ಸಹಾಯಕ ನಿರ್ದೇಶಕರಾದ ರೂಪಾಲಿ ಬಡಕುಂದ್ರಿ, ವಿಜಯ ಕೋತಿನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ತಾಪಂ, ಗ್ರಾಪಂ ಸಿಬ್ಬಂದಿ ಹಾಜರಿದ್ದರು.