ಬೆಂಗಳೂರು: ”ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿನ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬ್ಯುಸಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಸೋಮವಾರ ಮಾತನಾಡಿದ ಅವರು, ”ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿದೆ. ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ” ಎಂದು ತಿಳಿಸಿದರು.
ಸಂಪನ್ಮೂಲ ಒದಗಿಸುವ ತೊಟ್ಟಿಲು: ‘‘ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ. ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೇ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿ ಹೊರಹೊಮ್ಮಿದೆ” ಎಂದು ಎಂ.ಬಿ. ಪಾಟೀಲ್ ವಿವರಿಸಿದರು.
ಕೈಗಾರಿಕಾ ಕ್ರಾಂತಿ 4.0: ”ಸರ್ಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ರಾಜ್ಯ ಸರ್ಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುತ್ತಿದೆ. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0 ಅನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.
30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಭಾಗಿ: ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡರು. ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯೂಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯೂಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ. ಆರ್. ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯೂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು.