ಬೆಂಗಳೂರು: ರಾಜ್ಯದಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ (BPL Card) ಪಡಿತರದಾರರನ್ನು ಕೈ ಬಿಡುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ (Department of Food Civil Supplies) ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಈ ಸಭೆಯಲ್ಲಿ ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆಯು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ, ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ನೋಟಿಸ್ ನೀಡಿ ಕಾರ್ಡ್ ರದ್ದುಗೊಳಿಸಿ
ಅನರ್ಹ ಬಿಪಿಎಲ್ ಪಡಿತರದಾರರು ಸ್ವಯಂ ತಮ್ಮ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡ್ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
5,30,88,636 ಸದಸ್ಯರು ಫಲಾನುಭವಿಗಳಿದ್ದಾರೆ
ರಾಜ್ಯದಲ್ಲಿ ಒಟ್ಟು 1,53,69,945 ಪಡಿತರ ಚೀಟಿಗಳಲ್ಲಿ 5,30,88,636 ಸದಸ್ಯರು ಫಲಾನುಭವಿಗಳಿದ್ದಾರೆ. ಈಗಾಗಲೇ 4 ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದರಿಂದಾಗಿ 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಿಯಮಿತವಾಗಿ ಸಭೆ ನಡೆಸಿ ಕ್ರಮ
ಪಡಿತರ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸಬೇಕು. ಆ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವ ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದರು.