Wednesday, June 18, 2025
Google search engine
Homeರಾಜ್ಯಸರಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡುವ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ
spot_img

ಸರಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡುವ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬುಧವಾರ(ಜೂನ್ 4) ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಸರಕಾರವು ಸಾಕಷ್ಟು ಖರ್ಚು ಮಾಡಿದೆ. ಈ ಕುರಿತು ಜನರಿಗೆ ಮಾಹಿತಿಯನ್ನು ನೀಡುವ ಅಗತ್ಯವಿದೆ. ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಈ ಕೆಲಸವನ್ನು ಮಾಡಲಿದ್ದಾರೆ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಅವರು, ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

 

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಜೂನ್ 10 ರವರೆಗೆ ಮಾಹಿತಿ ಪ್ರದರ್ಶನ:

 

ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ  ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳ ಅನುಷ್ಠಾನ ಕುರಿತ ಅಂಕಿ-ಅಂಶಗಳು, ಯೋಜನೆಯ ಮಾಹಿತಿ, ಫಲಾನುಭವಿಗಳ ಛಾಯಾಚಿತ್ರ/ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.

ಇದಲ್ಲದೇ ಮಾನ್ಯ ಮುಖ್ಯಮಂತ್ರಿಗಳ ಜತೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲವಾಗುವಂತೆ ಸಾರ್ವಜನಿಕರಿಗಾಗಿ ನಾಲ್ಕು ಸೆಲ್ಫಿ ಪಾಯಿಂಟ್ ಕೂಡ ಸ್ಥಾಪಿಸಲಾಗುವುದು.

ಜೂನ್ 4 ರಿಂದ 10 ರವರೆಗೆ ಮಾಹಿತಿ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಹಿತಿ ಪ್ರದರ್ಶನವನ್ನು ವೀಕ್ಷಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಕೋರಿದ್ದಾರೆ.

***

RELATED ARTICLES
- Advertisment -spot_img

Most Popular

error: Content is protected !!