ಮಂಡ್ಯ: ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಿದೆ. ಹೀಗಾಗಿ ರಾಜ್ಯದಲ್ಲಿ ಒಂದೇ ವಿರೋಧಪಕ್ಷವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಳವಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಹುತೇಕ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಎರಡು ವಿರೋಧಪಕ್ಷಗಳಿಲ್ಲ. ಒಂದೇ ಒಂದು ವಿರೋಧಪಕ್ಷ ಇದ್ದಂತಾಗಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರು 28 ಕ್ಕೆ 28 ರಲ್ಲೂ ಗೆಲ್ಲುತ್ತೇವೆ ಎಂದು ಬುರುಡೆ ಬಿಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಂತೆ ಲೋಕಸಭೆಯಲ್ಲೂ ನಮ್ಮನ್ನು ಜನ ತಿರಸ್ಕರಿಸುತ್ತಾರೆ ಎಂದು ಬಿಜೆಪಿಯವರಿಗೆ ಅರ್ಥವಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಸ್ಥಳೀಯರ ಮುಖಂಡರ ಅಭಿಪ್ರಾಯ ಆಧರಿಸಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಸ್ಥಳೀಯ ಶಾಸಕರು, ಕಳೆದ ಚುನಾವಣೆಯಲ್ಲಿ ಸೋಲು ಕಂಡವರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಲಾಗುವುದು. ಅವರು ಹೇಳಿದವರಿಗೆ ಟಿಕೆಟ್ ನೀಡಲಾಗುತ್ತದೆ. ಮಹದೇವಪ್ಪ ಸೇರಿದಂತೆ ಯಾರ ಹೆಸರು ಹೇಳಿದರೂ ಅವರಿಗೆ ಟಿಕೆಟ್ ನೀಡಲಾಗುತ್ತದೆ.